ಕುಂದಾಪ್ರ ಕನ್ನಡದ ಕಂಪು, ಕರಾವಳಿಯ ಸಂಸ್ಕೃತಿಯ ಸೊಗಡು; ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ

ಬಾರ್ಕೂರು, ಆಗಸ್ಟ್ 12:
ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು, ಬಾರ್ಕೂರಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಹಾಗೂ ಆಟಿ ಅಮಾವಾಸ್ಯೆ ಸಂಭ್ರಮವನ್ನು ಆಗಸ್ಟ್ 12ರಂದು ಕಾಲೇಜಿನ ಸಭಾಂಗಣದಲ್ಲಿ ಸಡಗರದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ವಹಿಸಿದ್ದರು. ಮಾತನಾಡಿದ ಅವರು, “ಯುವಪೀಳಿಗೆ ಕುಂದಾಪ್ರ ಕನ್ನಡವನ್ನು ಪ್ರೀತಿಯಿಂದ ಮಾತನಾಡುವುದರೊಂದಿಗೆ ಅದರ ಶ್ರೀಮಂತ ಸಂಸ್ಕೃತಿಯನ್ನು ಅರಿತು, ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಜವಾಬ್ದಾರಿ ವಹಿಸಬೇಕು,” ಎಂದು ಕರೆ ನೀಡಿದರು.

ಮುಖ್ಯ ಅತಿಥಿಗಳಾದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಖಜಾಂಚಿ ಶ್ರೀ ಭರತ್ ಶೆಟ್ಟಿ ಮಾತನಾಡಿ, “ನಾಡು ಬದಲಾದರೂ ನುಡಿ ಬದಲಾಗದು. ನಮ್ಮ ಭಾಷೆ ಮತ್ತು ಸಂಸ್ಕೃತಿಯೇ ನಮ್ಮ ಹೆಮ್ಮೆ ಹಾಗೂ ಅಸ್ಮಿತೆ,” ಎಂದು ಅಭಿಪ್ರಾಯಪಟ್ಟರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಪ್ರಕಾಶ್ ಆಚಾರ್ಯ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಿತು.

ಕುಂದಾಪ್ರ ಕನ್ನಡದ ಭಾಷಾ ಸೊಗಡು, ಕರಾವಳಿಯ ಸಂಸ್ಕೃತಿ, ಸಂಪ್ರದಾಯ ಹಾಗೂ ಜೀವನಶೈಲಿಯ ವೈಶಿಷ್ಟ್ಯಗಳನ್ನು ಪರಿಚಯಿಸುವ ಉದ್ದೇಶದಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ಕುಂದಾಪ್ರ ಕನ್ನಡದ ಸಂಸ್ಕೃತಿ ಮತ್ತು ಪರಂಪರೆಯನ್ನು ಬಿಂಬಿಸುವ ಮನಮೋಹಕ ನೃತ್ಯ ಹಾಗೂ ಕರಾವಳಿಯ ಗ್ರಾಮೀಣ ಬದುಕಿನ ಸೊಗಡನ್ನು ಸಾರುವ ‘ಭತ್ತ ಕುಟ್ಟುವ ಹಾಡು’ ಪ್ರೇಕ್ಷಕರ ಗಮನ ಸೆಳೆದವು.




